ಕಲಬುರಗಿ: ಕೆಲವು ದಿನಗಳಿಂದ ಬಿಟ್ಟು ಬಿಡದೆ
ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಿಲ್ಲೆಯ
ವಿವಿಧ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ,
ಅದರಲ್ಲೂ ದಂಡೋತಿ ಗ್ರಾಮದಲ್ಲಿ ಎರಡು ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಅಪಾರ ಪ್ರಮಾಣದ ಹಾನಿಯುಂಟಾಗಿದೆ.
ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮುಹಮ್ಮದ್ ರಫೀಕ್ ರಸೂಲ್ ಸಾಬ್ ಡೋಂಗಾ ಹಾಗೂ ಪುಥಲಿ ಬೇಗಂ ಹುಸೇನ್ ಸಾಬ್ ಡೋಂಗಾ ಎನ್ನುವವರ ಮನೆಯ ಗೋಡೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ.
ಈ ಸಂದರ್ಭದಲ್ಲಿ ದಂಡೋತಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಮೈನೋದ್ದೀನ್ ಮಾತನಾಡಿ, ಕಳೆದ ಕೆಲವು ದಿನಗಳಿಂದ ಬಿಟ್ಟು ಬೀಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ದಂಡೋತಿ ಗ್ರಾಮದ ಎರಡು ಮನೆಗಳ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿನ ಅಡುಗೆ ಸಾಮಾನು, ಗ್ಯಾಸ್, ರೆಫ್ರಿಜರೇಟರ್ ಸೇರಿದಂತೆ ಒಟ್ಟು 3 ಲಕ್ಷ ರೂ ಹಾನಿ
ಸಂಭವಿಸಿದೆ. ಕೂಡಲೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ
ಸಂಬಂಧಪಟ್ಟ ಅಧಿಕಾರಿಗಳು ಸರಕಾರದಿಂದ ಪರಿಹಾರ
ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು
ಮನವಿ ಮಾಡಿದರು.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.