ಸುದ್ದಿ ಸಂಗ್ರಹ ಬೆಂಗಳೂರು
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಗೆ ರಾಜ್ಯ ಸರ್ಕಾರ ಮತ್ತೆ ಅವಕಾಶ ಕಲ್ಪಿಸಿದೆ. ಎಲ್ಲಾ ಧರ್ಮಗಳ ಧಾರ್ಮಿಕ, ಸಾಂಪ್ರದಾಯಿಕ ವಸ್ತುಗಳಿಗೆ ಅವಕಾಶ ಕೊಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸರ್ವಶಿಕ್ಷಣ ಕಚೇರಿಯಲ್ಲಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಹಿಜಬ್ ನಿರ್ಬಂಧಿಸಿ 2022ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದ ಸರ್ಕಾರ, ಹಿಜಬ್ ಧರಿಸಲು ಅವಕಾಶ ಕಲ್ಪಿಸಿ ಹೊಸ ಆದೇಶ ಜಾರಿ ಮಾಡಿದೆ. ಇದೆ ವೇಳೆ ಕೇಸರಿ ಶಾಲಿಗೆ ಅವಕಾಶ ಇದೆಯಾ ಎಂಬ ಪ್ರಶ್ನೆಗೆ ಸಚಿವರು ʻಇಲ್ಲʼ ಎಂದು ಉತ್ತರಿಸಿದರು.
ಜನಿವಾರ, ರುದ್ರಾಕ್ಷಿಗೆ ಅವಕಾಶ
ಶಿಕ್ಷಣ ಇಲಾಖೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಮಾಡಿದ್ದೆವೆ. ಜನಿವಾರ ಘಟನೆ ಇತ್ತೀಚೆಗೆ ಆಗಿತ್ತು. ಇದರಿಂದ ಮಕ್ಕಳಿಗೆ ಸಮಸ್ಯೆ ಆಗ್ತಿತ್ತು. ಮಾನಸಿಕ ಹಿಂಸೆ ಆಗ್ತಿತ್ತು. ಆದ್ದರಿಂದ ಧಾರ್ಮಿಕ ವಸ್ತ್ರಗಳಿಗೆ ಶಾಲಾ-ಕಾಲೇಜುಗಳಿಗೆ ಅವಕಾಶ ನೀಡಲಾಗಿದೆ. ಜನಿವಾರ, ಶಿವದಾರ ಸೇರಿದಂತೆ ಧಾರ್ಮಿಕ ವಸ್ತುಗಳಿಗೆ ಅವಕಾಶ ನೀಡಲಾಗಿದೆ. 1 ರಿಂದ 12ನೇ ತರಗತಿವರೆಗೂ ಇದು ಅನ್ವಯವಾಗಲಿದೆ. ಎಲ್ಲಾ ಧರ್ಮದ ಧಾರ್ಮಿಕ, ಸಂಪ್ರದಾಯದ ವಸ್ತುಗಳಿಗೂ ಅವಕಾಶ ಕೊಡಲಾಗಿದೆ ಎಂದರು.
ಹಿಜಬ್ಗೆ ಅವಕಾಶ
ಇನ್ನೂ ಹಿಜಬ್ಗೆ ಶಾಲಾ– ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಶೈಕ್ಷಣಿಕ ವರ್ಷದಿಂದಲೆ ಜಾರಿಗೆ ಬರಲಿದೆ. ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ ತಲೆವಸ್ತ್ರ/ಹಿಜಬ್ಗೆ ಅವಕಾಶ ಕಲ್ಪಿಸಲಾಗಿದೆ. ಮಕ್ಕಳ ಪರವಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ವಿವರಿಸಿದರು.
ಕೇಸರಿ ಶಾಲಿಗೆ ಅವಕಾಶ ಇಲ್ಲ
ಕೇಸರಿ ಶಾಲು ಧಾರ್ಮಿಕ ಅಂತ ಬರುವುದಿಲ್ಲ, ಆದ್ದರಿಂದ ಕೇಸರಿ ಶಾಲಿಗೆ ಶಾಲಾ– ಕಾಲೇಜುಗಳಲ್ಲಿ ಅವಕಾಶ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು.
2022ರ ಬಿಜೆಪಿ ಸರ್ಕಾರದ ಆದೇಶ ವಾಪಸ್
2022ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಶಾಲಾ– ಕಾಲೇಜುಗಳಲ್ಲಿ ಹಿಜಬ್ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ನಾವು 2022ರ ಸರ್ಕಾರದ ಆದೇಶ ಹಿಂಪಡೆದು ಹೊಸ ಆದೇಶ ಮಾಡಿದ್ದೆವೆ ಎಂದರು.
ಇನ್ನೂ ಬಿಜೆಪಿ ಸರ್ಕಾರದ ಆದೇಶ ಎತ್ತಿಹಿಡಿದಿದ್ದ ಹೈಕೋರ್ಟ್ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿ, ಹೈಕೋರ್ಟ್ ಆದೇಶದ ಬಗ್ಗೆ ಮಾತಾಡಲ್ಲ, ಅದನ್ನು ಲೀಗಲ್ ಟೀಂ ನವರು ನೋಡಿಕೊಳ್ತಾರೆ ಎಂದು ಉತ್ತರಿಸಿದರು.
ರಾಜ್ಯ ಸರ್ಕಾರದ ಹೊಸ ಆದೇಶದಲ್ಲಿ ಏನಿದೆ ?
- ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಪದವಿಪೂರ್ವ ಕಾಲೇಜುಗಳು, ಸಂಸ್ಥೆಯ ಅಗತ್ಯಗಳಿಗೆ ಮತ್ತು ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ನಿಯಮಾನುಸಾರ ಸಮವಸ್ತ್ರವನ್ನು ನಿಗದಿಪಡಿಸಿ ಕಡ್ಡಾಯಗೊಳಿಸುವುದನ್ನ ಮುಂದುವರಿಸತಕ್ಕದ್ದು.
- ವಿದ್ಯಾರ್ಥಿಗಳು ನಿಗದಿಪಡಿಸಲಾದ ಸಮವಸ್ತ್ರದೊಂದಿಗೆ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸಲಾಗಿದೆ. ಆದರೆ ಇಂತಹ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳು ಸಮವಸ್ತ್ರಕ್ಕೆ ಪೂರಕವಾಗಿರಬೇಕು ಮತ್ತು ನಿಗದಿತ ಸಮವಸ್ತ್ರವನ್ನು ಬದಲಿಸುವ, ಮೂಲ ಉದ್ದೇಶವನ್ನು ಮಾರ್ಪಡಿಸುವ ಅಥವಾ ವಿಫಲಗೊಳಿಸುವಂತಿರಬಾರದು.
- ಇಂತಹ ಅನುಮತಿಸಬಹುದಾದ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳು ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ತಲೆವಸ್ತ್ರ/ಹಿಜಾಬ್ ಅಥವಾ ಇತರೆ ಯಾವುದೆ ಸಮಾನ ಸ್ವರೂಪದ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳು ಸೇರಿರಬಹುದು. ಆದರೆ ಇವು ಶಿಸ್ತು, ಸುರಕ್ಷತೆ ಮತ್ತು ವಿದ್ಯಾರ್ಥಿಯ ಗುರುತಿಸುವಿಕೆಗೆ ಅಡ್ಡಿಯಾಗಬಾರದು.
- ನಿಗದಿತ ಸಮವಸ್ತ್ರದೊಂದಿಗೆ ಇಂತಹ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳು ಧರಿಸಿರುವ ಕಾರಣಕ್ಕಾಗಿ ಯಾವುದೆ ವಿದ್ಯಾರ್ಥಿಗೆ ಶಿಕ್ಷಣ ಸಂಸ್ಥೆ ತರಗತಿ ಪರೀಕ್ಷಾ ಕೊಠಡಿ ಅಥವಾ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರವೇಶ ನಿರಾಕರಿಸುವಂತಿಲ್ಲ.
- ಇಂತಹ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳನ್ನು ಧರಿಸುವಂತೆ ಯಾವುದೆ ವಿದ್ಯಾರ್ಥಿಯನ್ನು ಒತ್ತಾಯಿಸುವಂತಿಲ್ಲ. ಅದೆ ರೀತಿ ಸರ್ಕಾರವು ಅನುಮತಿಸಿರುವ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳನ್ನು ಬಲವಂತವಾಗಿ ತೆಗೆಯುವಂತೆಯೂ ಒತ್ತಾಯಿಸುವಂತಿಲ್ಲ. ಆದರೆ ಪರೀಕ್ಷಾ ಸಂದರ್ಭಗಳಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದ ವಸ್ತ್ರ, ಸಂಹಿತೆಯ ನಿಯಮಗಳ ಸಂದರ್ಭೋಚಿತವಾಗಿ ಸಂಬಂಧಿಸಿದ ಪ್ರಾಧಿಕಾರಗಳು ಅಳವಡಿಸಿಕೊಳ್ಳತಕ್ಕದ್ದು.
- ಈ ಆದೇಶದ ಅನುಷ್ಠಾನವು ಏಕರೂಪವಾಗಿರಬೇಕು. ಧಾರ್ಮಿಕ, ಸಾಂಪ್ರದಾಯಿಕ ನಿಷ್ಪಕ್ಷಪಾತತೆಯಿಂದ ಕೂಡಿರಬೇಕು ಮತ್ತು ತಾರತಮ್ಯ ರಹಿತವಾಗಿರಬೇಕು.
- ಸಮಾನತೆ, ಘನತೆ, ಭಾತೃತ್ವ, ಜಾತ್ಯತೀತತೆ, ವೈಜ್ಞಾನಿಕತೆ, ವೈಚಾರಿಕತೆ ಮತ್ತು ಶಿಕ್ಷಣದ ಹಕ್ಕು ಎಂಬ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿರತಕ್ಕದ್ದು.