ಸುದ್ದಿ ಸಂಗ್ರಹ ನವದೆಹಲಿ
ರಾಜ್ಯಸಭಾ ಸದಸ್ಯರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಸಭೆ ಸಭಾಪತಿಯೂ ಆಗಿರುವ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಪ್ರತಿಜ್ಞಾವಿಧಿ ಬೋಧಿಸಿದರು. ಖರ್ಗೆಯವರು ಹಿಂದಿ ಭಾಷೆಯಲ್ಲಿ ಪ್ರಮಾಣ ಸ್ವೀಕರಿಸಿದರು. ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡಿದ್ದರು.
ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಿದ್ದ ಅವರು, ಅವಿರೋಧವಾಗಿ ಆಯ್ಕೆಯಾಗಿದ್ದರು. ಇದು ರಾಜ್ಯಸಭೆಯಲ್ಲಿ ಅವರದು ಎರಡನೇ ಅವಧಿ.
ಪ್ರತಿಜ್ಞಾವಿಧಿ ಸ್ವೀಕರಿಸಿದ ಖರ್ಗೆಯವರನ್ನು ಅಭಿನಂಧಿಸಿದ ಉಪರಾಷ್ಟ್ರಪತಿ, ಅವರ ಅನುಭವದ ಪ್ರಯೋಜನ ಖಂಡಿತಾ ರಾಜ್ಯಸಭೆಗೆ ಲಾಭ ಉಂಟು ಮಾಡಲಿದೆ ಎಂದರು.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಈ ವೇಳೆ ಇದ್ದರು.
ಮೇಲ್ಮನೆ ನಾಯಕ ಜೆ.ಪಿ ನಡ್ಡಾ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಕಾನೂನು ಸಚಿವ ಅರ್ಜುನ್ ರಾಮ್ ಮೇಘಾವಲ್ ಹಾಗೂ ರಾಜ್ಯಸಭೆ ಉಪಸಭಾಪತಿ ಹರಿವಂಶ್ ಕೂಡ ಇದ್ದರು.