ಸುದ್ದಿ ಸಂಗ್ರಹ ಬೆಂಗಳೂರು
ಬಿಗ್ ಬಾಸ್ ಕನ್ನಡ ಸೀಸನ್ 13 ಶೋ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಕೂಡ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ನಡೆಯಬೇಕಿದೆ. ಕಿಚ್ಚ ಸುದೀಪ್ ಅವರು ಶೋ ನಿರೂಪಣೆ ಮಾಡಲು ಸಜ್ಜಾಗಿದ್ದಾರೆ. ಆದರೆ ಕಳೆದ ಸೀಸನ್ ವೇಳೆ ಉಂಟಾದ ವಿವಾದದಿಂದ ಈ ಬಾರಿ ಸರ್ಕಾರದ ಅನುಮತಿ ಇನ್ನೂ ಸಿಕ್ಕಿಲ್ಲ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಬಿಗ್ ಬಾಸ್ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.
ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಣ್ಯ ಸಚಿವರು ಮಾತನಾಡಿ, ‘ಬಿಗ್ ಬಾಸ್ ಶೋ ನಡೆಸಲು ಇನ್ನೂ ಅನುಮತಿ ಕೊಟ್ಟಿಲ್ಲ. ಅನುಮತಿ ಕೇಳಿದ್ದಾರಾ ಎಂಬುದು ತಿಳಿದುಕೊಂಡು ಹೇಳುತ್ತೆನೆ’ ಎಂದಿದ್ದಾರೆ. ‘ಬಿಗ್ ಬಾಸ್ ಆಯೋಜಕರು ಒಂದು ವೇಳೆ ನಿಯಮ ಮೀರಿದರೆ ದಂಡ ಹಾಕಿ’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪರಿಸರಕ್ಕೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂಬ ಕಾರಣಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ತೊಂದರೆ ಉಂಟಾಗಿತ್ತು. ನಂತರ ಅದನ್ನು ಸರಿಪಡಿಸಿಕೊಂಡು ಶೋ ಮುಂದುವರಿಸಲಾಗಿತ್ತು. ಈ ಬಾರಿ ಇನ್ನಷ್ಟು ಎಚ್ಚರಿಕೆ ವಹಿಸುವ ಅವಶ್ಯಕತೆ ಇದೆ. ಆದರೆ ಶೋ ಆರಂಭಕ್ಕೆ ಕೆಲವೇ ದಿನಗಳು ಉಳಿದಿರುವಾಗ ಇನ್ನೂ ಸರ್ಕಾರದ ಅನುಮತಿ ಪಡೆದಿಲ್ಲ ಎಂಬ ವಿಷಯ ತಿಳಿದುಬಂದಿದೆ.
ಸೆಪ್ಟೆಂಬರ್ 6ರಂದು ‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭಿಸಲು ದಿನಾಂಕ ನಿಗದಿ ಮಾಡಲಾಗಿದೆ. ಈಗಾಗಲೆ ಸುದೀಪ್ ಅವರ ಪ್ರೋಮೋಗಳು ಬಿಡುಗಡೆಯಾಗಿ ಗಮನ ಸೆಳೆದಿದೆ. ಯಾವೆಲ್ಲ ಸ್ಪರ್ಧಿಗಳು ಈ ಬಾರಿ ದೊಡ್ಮನೆಗೆ ಕಾಲಿಡುತ್ತಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. ಇಂಥ ಸಂದರ್ಭದಲ್ಲಿ ಸರ್ಕಾರದ ಅನುಮತಿ ಪಡೆದಿಲ್ಲ ವಿಷಯ ತಿಳಿದು ಅಚ್ಚರಿ ಆಗಿದೆ.
ಈ ಬಾರಿ ಬಿಗ್ ಬಾಸ್ ಮನೆಗೆ ಸೆಲೆಬ್ರಿಟಿಗಳು ಮಾತ್ರವಲ್ಲದೆ ಜನಸಾಮಾನ್ಯರು ಕೂಡ ಎಂಟ್ರಿ ನೀಡಲಿದ್ದಾರೆ. ಅದಕ್ಕಾಗಿ ಈಗಾಗಲೆ ಆಡಿಷನ್ ಮಾಡಲಾಗಿದೆ. ಅಂತಿಮ ಹಂತದ ಆಡಿಷನ್ ಪ್ರಕ್ರಿಯೆಯನ್ನು ‘ಅಗ್ನಿ ಪರೀಕ್ಷೆ’ ಸಂಚಿಕೆಗಳ ಮೂಲಕ ತೋರಿಸಲಾಗಿದೆ. ಅದು ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದೆ.