ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಆರ್ ಪಾಟೀಲ ಅವರಿಗೆ ಈಗ ಹೊಸ ಹುದ್ದೆ

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಅಳಂದ ಕಾಂಗ್ರೆಸ್​ ಶಾಸಕ ಬಿಆರ್ ಪಾಟೀಲ್​ ಅವರಿಗೆ ಈಗ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಂಪುಟ ದರ್ಜೆ ಸ್ಥಾನಮಾನ ಮತ್ತು ಎಲ್ಲಾ ಸೌಲಭ್ಯ ನೀಡವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಿಎಂ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಬಿ.ಆರ್ ಪಾಟೀಲ್​ ಅವರಿಗೆ ಹೊಸ ಹುದ್ದೆ ನೀಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ, ಇದನ್ನು ಅವರು ಸ್ವೀಕಾರ ಮಾಡುತ್ತಾರಾ ಎನ್ನುವುದೇ ಮುಂದಿರುವ ಪ್ರಶ್ನೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಚಿವ ಸ್ಥಾನ ಸಿಗದಿದ್ದರಿಂದ ಕೆಲ ಹಿರಿಯ ಶಾಸಕರು ಅಸಮಾಧಾನಗೊಂಡಿದ್ದರು. ನಾವು ಹಿರಿಯರಿದ್ದರೂ ಸರ್ಕಾರದಲ್ಲಿ ಯಾವುದೆ ಸ್ಥಾನಮಾನ ಸಿಕ್ಕಿಲ್ಲ ಎಂದು ಬಸವರಾಜ ರಾಯರೆಡ್ಡಿ, ಆರ್​ವಿ ದೇಶಪಾಂಡೆ ಹಾಗೂ ಬಿಆರ್ ಪಾಟೀಲ್ ಅಸಮಾಧಾನ ಹೊರಹಾಕಿದ್ದರು. ಇದರಿಂದ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಈ ಮೂವರು ಹಿರಿಯ ಶಾಸಕರಿಗೆ ಸಚಿವ ಸಂಪುಟ ಸ್ಥಾನಮಾನದ ಹುದ್ದೆ ನೀಡಿದ್ದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ನೇಮಕ ಮಾಡಿದ್ದರೆ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಆರ್.ವಿ ದೇಶಪಾಂಡೆ ಅವರನ್ನು ನೇಮಕ ಮಾಡಲಾಗಿತ್ತು. ಇನ್ನು ಬಿಆರ್‌ ಪಾಟೀಲ್‌ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರನ್ನಾಗಿ ನೇಮಿಸಲಾಗಿತ್ತು. ಆದರೆ ಕೆಲ ತಿಂಗಳ ಬಳಿಕ ಬಿಆರ್ ಪಾಟೀಲ್​ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಬಿಆರ್ ಪಾಟೀಲ್​ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *