ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
1 ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರದ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಾಗಿದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿತರಣೆ ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವಂತೆ ಶಿಕ್ಷಣ ಇಲಾಖೆ ಕಲಬುರಗಿ ಹಾಗೂ ಧಾರವಾಡ ಅಪರ ಆಯುಕ್ತರು ಕೋರಿದ್ದರು. ಇದೆ ರೀತಿಯ ಆಗ್ರಹ ಇನ್ನೂ ಕೆಲ ಜಿಲ್ಲೆಗಳಿಂದಲೂ ವ್ಯಕ್ತವಾಗಿತ್ತು ಈ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ.
ರಾಜ್ಯದ ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದ ಆರು ದಿನ ಮೊಟ್ಟೆ ವಿತರಿಸಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುತ್ತಿತ್ತು.
ಬಹುತೇಕ ಶಾಲೆಗಳಲ್ಲಿ ಚಿಕ್ಕಿಯ ಗಾತ್ರ ಒಂದೇ ತೆರನಾಗಿ ಇಲ್ಲದಿರುವುದು, ಅವಧಿ ಮೀರಿದ ಸಂಗ್ರಹ ಮತ್ತಿತರ ಕಾರಣಗಳಿಂದಲೂ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಚಿಕ್ಕಿ ವಿತರಣೆ ಮಾಡಬಾರದು ಎಂದು ಇಲಾಖೆ ಸೂಚಿಸಿದೆ.
ಬಹುತೇಕ ಶಾಲೆಗಳಲ್ಲಿ ಚಿಕ್ಕಿಯ ಗಾತ್ರ ಒಂದೇ ತೆರನಾಗಿ ಇಲ್ಲದಿರುವುದು, ಅವಧಿ ಮೀರಿದ ಸಂಗ್ರಹ ಮತ್ತಿತರ ಕಾರಣಗಳಿಂದಲೂ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಚಿಕ್ಕಿ ವಿತರಣೆ ಮಾಡಬಾರದು ಎಂದು ಇಲಾಖೆ ಸೂಚಿಸಿದೆ.