ಎಲ್ಲರಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯಲಿ

ಜಿಲ್ಲೆ

ಕಲಬುರಗಿ: ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆವಣಿಗೆಯಾಗಿದೆ. ಆದರೆ ಇಂದಿಗೂ ಕೂಡಾ ಮೌಢ್ಯತೆ, ಕಂದಾಚಾರ, ಅಂಧಶೃದ್ಧೆ ನಿರ್ಮೂಲನೆಯಾಗಿಲ್ಲ. ಆದ್ದರಿಂದ ಸತ್ಯ, ವೈಚಾರಿಕತೆ ಹೊಂದಿರುವ ವಿಜ್ಞಾನದ ಅಂಶಗಳು, ವಿಷಯಗಳು ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಸುಂದರವಾಗುತ್ತದೆ ಮತ್ತು ರಾಷ್ಟ್ರದ ಅಭಿವೃದ್ಧಿಯಾಗುತ್ತದೆ ಎಂದು ಉಪನ್ಯಾಸಕ, ವಿಚಾರವಾದಿ ಎಚ್.ಬಿ ಪಾಟೀಲ ಹೇಳಿದರು.

ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯಲ್ಲಿ ಸರ್ ಸಿ.ವಿ ರಾಮನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಂತರ ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಮಾತನಾಡಿದ ಅವರು,

ಯಾವುದೆ ಒಂದು ರಾಷ್ಟ್ರದ ಅಭಿವೃದ್ಧಿಯು ಅಲ್ಲಿನ ವಿಜ್ಞಾನದ ಬೆಳವಣಿಗೆಯ ಮೇಲೆ ಅವಲಂಬಿಸಿದೆ. ವಿಜ್ಞಾನವು ಹೊಸ ಸಂಶೋಧನೆಯ ಮೂಲಕ ಅನೇಕ ಸೌಕರ್ಯಗಳನ್ನು ದೊರೆಯುವಂತೆ ಮಾಡಿ, ರಾಷ್ಟ್ರವು ಶೀಘ್ರವಾಗಿ ಅಭಿವೃದ್ಧಿ ಹೊಂದುವಂತೆ ಮಾಡುತ್ತದೆ. ವಿಜ್ಞಾನವು ರಾಷ್ಟ್ರದ ಅಭಿವೃದ್ಧಿಯ ಚಾಲನಾ ಶಕ್ತಿಯಾಗಿದ್ದು, ಅದರ ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಿಂದಲೆ ವಿಜ್ಞಾನದ ತುಂಬಾ ಆಸಕ್ತಿ, ಸಂಶೋಧನಾ ಪ್ರವೃತ್ತಿ ಬೆಳೆಯುವಂತೆ ಶಿಕ್ಷಕರು ಪೂರಕವಾದ ವಾತಾವರಣ ನಿರ್ಮಿಸಬೇಕು ಎಂದರು.

ಸರ್.ಸಿ.ವಿ ರಾಮನ್ ಅವರು ತಮ್ಮ ‘ರಾಮನ್ ಪರಿಣಾಮ’ ಸಂಶೋಧನೆಯ ಮೂಲಕ ಇಡೀ ವಿಶ್ವವೇ ಭಾರತದಡೆಗೆ ತಿರುಗಿ ನೋಡುವಂತೆ ಮಾಡಿದ್ದಾರೆ. ಸಮುದ್ರದ ನೀಲಿ ಬಣ್ಣಕ್ಕೆ ಬೆಳಕಿನ ಚದುರುವಿಕೆಯ ಕಾರಣವೆಂಬ ಸಂಶೋಧನೆಗೆ ವಿಶ್ವದ ಶ್ರೇಷ್ಠ ಪ್ರಶಸ್ತಿಯಾದ ನೋಬಲ್ ಪಾರಿತೋಷಕ 1930 ರಲ್ಲಿ ಪಡೆದು ನಮ್ಮ ದೇಶದ ಕೀರ್ತಿಯನ್ನು ವಿಶ್ವದೆಲ್ಲೆಡೆ ಪಸರಿಸುವಂತೆ ಮಾಡಿದ್ದಾರೆ. ಇದರ ಸವಿನೆನಪಿಗಾಗಿ ಪ್ರತಿವರ್ಷ ‘ಫೆ-28’ನ್ನು ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯನ್ನಾಗಿ ಆಚರಿಸಲಾಗುತ್ತದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಗ್ರಾಮೀಣ ಘಟಕದ ಮಾಜಿ ಸಂಚಾಲಕ ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಸ್ಥೆಯ ಅಧ್ಯಕ್ಷ ಬಸವರಾಜ ಮಳ್ಳಿ, ಶಿಕ್ಷಕಿ ಸೋನಿಯಾ ಸರಡಗಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *