ಕಲಬುರ್ಗಿ: ಯಾವುದೆ ಗೌರವಧನವಿಲ್ಲದೆ ದುಡಿಯುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರಿ ಆದೇಶ ಹೊರಡಿಸುವಂತೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ/ಬಿಟಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ತಾಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.
ಕಲಬುರ್ಗಿಯಲ್ಲಿ ಸಚಿವರನ್ನು ಭೇಟಿಯಾದ ಪತ್ರಕರ್ತರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ 2024 – 25ರ ತಮ್ಮ ಬಜೆಟ್ ಭಾಷಣದಲ್ಲಿ ಮಂಡಿಸಿದ್ದಾರೆ. ಆದರೆ ಇದುವರೆಗೂ ಆ ಕುರಿತು ಸರಕಾರಿ ಆದೇಶ ಹೊರಡಿಸಿಲ್ಲ. ಆದ್ದರಿಂದ ಕೂಡಲೇ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಒದಗಿಸುವ ಕುರಿತು ಸರಕಾರಿ ಆದೇಶ ಹೊರಡಿಸುವಂತೆ ಸಾರಿಗೆ ಸಚಿವರ ಗಮನಕ್ಕೆ ತರುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಬಜೆಟ್ ಮಂಡಿಸಿದ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿರುವದರಿಂದ ಯಾವುದೇ ಸರ್ಕಾರಿ ಆದೇಶ ಹೊರಡಿಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಸಂಪುಟ ಹಾಗೂ ಸಾರಿಗೆ ಸಚಿವರ ಗಮನಕ್ಕೆ ತರುವದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ವೀರೇಂದ್ರ ಕೊಲ್ಲೂರ, ತಾಲೂಕು ಘಟಕದ ಗೌರವಾಧ್ಯಕ್ಷ ರವಿಶಂಕರ ಬುರ್ಲಿ, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮಶಾಕ್ ಮುಲ್ಲಾ ಕಮರವಾಡಿ, ಮಾಜಿ ಅಧ್ಯಕ್ಷ ಕಾಶಿನಾಥ ಗುತ್ತೇದಾರ, ವಿಕ್ರಮ್ ತೇಜಸ್, ದಯಾನಂದ ಖಜೂರಿ, ಕರುಣೆೇಶ ಕೆಲ್ಲೂರು, ಅನಂತನಾಗ ದೇಶಪಾಂಡೆ, ಅಣ್ಣಾರಾಯ ಪಾಟೀಲ, ಸಂತೋಷ್ ಕಟ್ಟಿಮನಿ, ಪೃಥ್ವಿರಾಜ್ ಸಾಗರ್ ಇದ್ದರು.