ಕಲಬುರಗಿ: ದೇಶದ ಸ್ವಾತಂತ್ರ ಚಳುವಳಿ ಇತಿಹಾಸದಲ್ಲಿ ಮುಖ್ಯವಾಗಿದೆ. ಮಹಾತ್ಮ ಗಾಂಧೀಜಿಯವರು ಬ್ರಿಟಿಷರ ಆಡಳಿತ ಕಾಲದಲ್ಲಿ ಉಪ್ಪಿನ ಮೇಲೆ ವಿಧಿಸಿದ ತೆರಿಗೆಯನ್ನು ವಿರೋಧಿಸಿ ತಮ್ಮ ಅನುಯಾಯಿಗಳೊಂದಿಗೆ ಸಬರಮತಿ ಆಶ್ರಮದಿಂದ ಸಮುದ್ರ ದಡದಲ್ಲಿರುವ ದಂಡಿಯವರೆಗಿನ 240 ಮೈಲಿ ಕಾಲ್ನಡಿಗೆಯಲ್ಲಿ ಕ್ರಮಿಸಿ 1930ರ ಎಪ್ರಿಲ್ 6ರಂದು ಉಪ್ಪನ್ನು ತಯಾರಿಸಿ, ಬ್ರಿಟಿಷರಿಗೆ ಬಿಸಿ ಮುಟ್ಟಿಸುವ ಮೂಲಕ ದೇಶದ ಸ್ವಾತಂತ್ರ ಚಳುವಳಿಯಲ್ಲಿ ಪ್ರಮುಖ ಸ್ಥಾನ ಪಡೆದಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.
ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಉಪ್ಪಿನ ಸತ್ಯಾಗ್ರಹ ದಿನಾಚರಣೆ’ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಬಸವರಾಜ ಮಳ್ಳಿ ಮಾತನಾಡಿ, ಸಮುದ್ರ ದಡದಲ್ಲಿರುವ ನಾಗರಿಕರಿಗೆ ಉಪ್ಪು ಉಚಿತವಾಗಿ ದೊರೆಯುತ್ತಿದ್ದರೂ ಕೂಡಾ ಅದನ್ನು ಸರ್ಕಾರದಿಂದ ಖರೀದಿಸುವಂತೆ ಮಾಡಲಾಗಿತ್ತು. ಇದರಿಂದ ಬಡವರು, ಜನಸಾಮಾನ್ಯರಿಗೆ ತುಂಬಾ ತೊಂದರೆ ಅನುಭವಿಸುತ್ತಿದ್ದನ್ನು ಗಮನಿಸಿದ ಮಹಾತ್ಮ ಗಾಂಧೀಜಿಯವರು ಉಪ್ಪಿನ ಸತ್ಯಾಗ್ರಹ (ದಂಡಿಯಾತ್ರೆ) ಮಾಡುವ ಮೂಲಕ ಅವರಿಗೆ ನ್ಯಾಯ ಒದಗಿಸಿಕೊಟ್ಟರು. ಇದು ಸ್ವಾತಂತ್ರ್ಯ ಚಳುವಳಿಗೆ ಪ್ರಖರತೆಯ ಹೆಚ್ಚಳಕ್ಕೆ ಕಾರಣವಾಯಿತು ಎಂದರು.
ಕಾರ್ಯಕ್ರಮದಲ್ಲಿ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದ ಅಧ್ಯಕ್ಷ ಅಸ್ಲಾಂ ಶೇಖ್, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿ ಸೋನಿಯಾ ಸರಡಗಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.