ಕಲಬುರಗಿ: ಒಬ್ಬ ವ್ಯಕ್ತಿಯ ಜೀವನದ ದಿಕ್ಕನ್ನು ಬದಲಿಸುವ ಶಕ್ತಿ ಶ್ರೇಷ್ಠ ಗ್ರಂಥಗಳಿವೆ. ಪುಸ್ತಕಗಳು ಸಾಧನೆಯ ದಾರಿ ತಿಳಿಸುವ ಮೂಲಕ ಉನ್ನತ ಸಾಧನೆ, ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಿವೆ. ಆದ್ದರಿಂದ ಪುಸ್ತಕಗಳು, ಪತ್ರಿಕೆಗಳನ್ನು ಓದುವ ಉತ್ತಮ ಹವ್ಯಾಸ ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು.
ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಪುಸ್ತಕ ದಿನಾಚರಣೆ’ ವಿದ್ಯಾರ್ಥಿಗಳಿಗೆ ವಿವಿಧ ಪುಸ್ತಕಗಳನ್ನು ಉಚಿತವಾಗಿ ವಿತರಿಸಿದ ನಂತರ ಮಾತನಾಡಿದ ಅವರು, ಜ್ಞಾನಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಇದು ಯಾರಿಂದಲೂ ಕಳ್ಳತನ ಮಾಡಲಾಗದ ಸಂಪತ್ತಾಗಿದೆ. ಇಂತಹ ಅಮೂಲ್ಯವಾದ ಸಂಪತ್ತನ್ನು ಪ್ರತಿಯೊಬ್ಬರು ಪಡೆಯಬೇಕಾದರೆ ಸದಾ ಪುಸ್ತಕ ಓದಬೇಕು. ವಿದ್ಯಾರ್ಥಿ ದೆಸೆಯಿಂದಲೆ ಶ್ರೇಷ್ಠ ಪುಸ್ತಕಗಳನ್ನು ಓದುವ ಹವ್ಯಾಸ ಮೈಗೂಡಿಸಿಕೊಳ್ಳಬೇಕು. ನಾವು ಹೆಚ್ಚು ಓದಿದಷ್ಟು ಅರಿವು ಮತ್ತು ಜ್ಞಾನದ ವ್ಯಾಪ್ತಿ ಹೆಚ್ಚಾಗಿ ವ್ಯಕ್ತಿ, ಶಕ್ತಿಯಾಗುತ್ತಾನೆ. ವಿಶೇಷವಾಗಿ ಯುವಕರು ಉತ್ತಮ ಗ್ರಂಥಗಳ ಅಧ್ಯಯನದತ್ತ ಚಿತ್ತಹರಿಸಬೇಕಾಗಿರುವುದು ಇಂದಿನ ಅಗತ್ಯತೆಯಾಗಿದೆ ಎಂದು ಒತ್ತಿ ಹೇಳಿದರು.
ಸಂಸ್ಥೆಯ ಮುಖ್ಯಸ್ಥ ಬಸವರಾಜ ಮಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕಗಳಿಕೆ ಅಥವಾ ಪ್ರಮಾಣ ಪತ್ರಕ್ಕಾಗಿ ಅಧ್ಯಯನ ಮಾಡಿದರೆ ಸಾಲದು. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಬೇಕು. ಪುಸ್ತಕ ಓದುವದರಿಂದ ಶ್ರೇಷ್ಠ ಸಂಸ್ಕೃತಿ, ಕಲೆ, ಸಾಹಿತ್ಯ, ಮಾನವೀಯ ಮೌಲ್ಯಗಳು ತಿಳಿಯುತ್ತವೆ. ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪುಸ್ತಕಗಳು ಪ್ರೇರಣೆ ನೀಡುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶರಣು ಎ.ಕಮಠಾಣ, ಪ್ರಮುಖರಾದ ಸುಜಾತಾ ಬಿ.ಮಳ್ಳಿ, ಸೋನಿಯಾ ಸರಡಗಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.