ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ, ಪ್ರೋತ್ಸಾಹಿಸಿದರೆ ಸಾಧನೆ ಸಾಧ್ಯ

ಜಿಲ್ಲೆ

ಕಲಬುರಗಿ: ನಮ್ಮ ಭಾಗದಲ್ಲೂ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರನ್ನು ಗುರ್ತಿಸಿ, ಪ್ರೋತ್ಸಾಹಿಸಿದರೆ ಸಾಧನೆ ಮಾಡಲು ಸಾಧ್ಯ ಎಂದು ದೈಹಿಕ ಶಿಕ್ಷಣ ಶಿಕ್ಷಕ ಶರಣು ಮಲಶೆಟ್ಟಿ ಅಭಿಮತಪಟ್ಟರು.

ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಅಥ್ಲೆಟಿಕ್ಸ್ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೆ ರಾಷ್ಟ್ರದಲ್ಲಿ ಕ್ರೀಡಾ ಕ್ಷೇತ್ರ ಬೆಳವಣಿಗೆಯಾಗಬೇಕಾದರೆ, ಅಲ್ಲಿನ ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ ಅವರಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ನೀಡಬೇಕು. ದೈಹಿಕ ಶಿಕ್ಷಕರು, ತರಬೇತಿದಾರರಿಗೆ ನಿರಂತರವಾಗಿ ಸೂಕ್ತ ತರಬೇತಿ ನೀಡುವ ಮೂಲಕ ಹೊಸ ವಿಷಯ, ನಿಯಮ, ಕ್ರೀಡೆಗಳ ಬಗ್ಗೆ ತಿಳಿಸಿಕೊಡಬೇಕು ಎಂದರು.

ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಕ್ರೀಡೆಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿವೆ. ಪ್ರತಿಯೊಬ್ಬರಲ್ಲಿಯೂ ಕ್ರೀಡಾ ಮನೋಭಾವ ಬೆಳೆಯಬೇಕು. ಅಥ್ಲೆಟಿಕ್ಸ್ ಕ್ರೀಡೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಮೇ-7 ರಂದು ಈ ದಿನಾಚರಣೆ ಆಚರಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ದತ್ತು ಹಡಪದ, ಪ್ರಮುಖರಾದ ಶಿವಯೋಗೆಪ್ಪಾ ಎಸ್.ಬಿರಾದಾರ, ಡಾ.ರಾಜಶೇಖರ ಪಾಟೀಲ್ ಮತ್ತು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಇದ್ದರು‌.

Leave a Reply

Your email address will not be published. Required fields are marked *