ಕಲಬುರಗಿ: ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣು, ಬಾಯಿ, ವಸಡು, ಕೀಲು ನೋವು, ಮೂಗಿನಿಂದ ರಕ್ತಸ್ರಾವ, ಚರ್ಮದ ಮೇಲೆ ಅಲ್ಲಲ್ಲಿ ರಕ್ತದ ಗುರುತು ಕಂಡುಬಂದರೆ ಇವು ಡೆಂಗ್ಯೂ ಜ್ವರದ ಲಕ್ಷಣಗಳಾಗಿವೆ. ಹೀಗಾಗಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿ ಡೆಂಗ್ಯೂ ದೃಢಪಟ್ಟರೆ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಸಲಹೆ ನೀಡಿದ್ದಾರೆ.
ನಗರದ ಶೇಖರೋಜಾದ ಶಹಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಶುಕ್ರವಾರ ಜರುಗಿದ ‘ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಇನ್ನೂ ಕೆಲವು ದಿವಸಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಡೆಂಗ್ಯೂ ಕಾಯಿಲೆಯ ಪ್ರಕರಣ ಕೂಡಾ ಕಂಡುಬರುತ್ತವೆ. ಡೆಂಗ್ಯೂ ಜ್ವರಕ್ಕೆ ಯಾವುದೆ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ಮಳೆಗಾಲ ಪ್ರಾರಂಭವಾದರೆ ಹೆಚ್ಚಿನ ಪ್ರಮಾಣದಲ್ಲಿ ಡೆಂಗ್ಯೂ ಜ್ವರ ಕಂಡುಬರುತ್ತದೆ. ಈಡಿಸ್ ಇಜಿಪ್ಟೀ ಎಂಬ ಸೊಳ್ಳೆಯಿಂದ ಉತ್ಪತ್ತಿಯಾಗಿ, ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ ಮತ್ತು ಹಗಲಿನ ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತದೆ ಎಂದರು.
ಸೊಳ್ಳೆಗಳ ಪರದೆ ಬಳಸಬೇಕು. ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ನೋಡಿಕೊಂಡು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸೊಳ್ಳೆಗಳ ನಿಯಂತ್ರಣ ರೋಗ ಹತೋಟಿಯ ಪ್ರಮುಖ ಕ್ರಮವಾಗಿದೆ. ನೀರು ಸಂಗ್ರಹಿಸುವ ತೊಟ್ಟಿಯನ್ನು ಆಗಾಗ್ಗೆ ತೊಳೆಯಬೇಕು. ಬಯಲಿನಲ್ಲಿ ಕಂಡುಬರುವ ತ್ಯಾಜ್ಯಗಳಾದ ಟಯರ್, ಎಳೆ ನೀರಿನ ಚಿಪ್ಪು, ಒಡೆದ ಬಾಟಲಿಯಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಿ, ಅವುಗಳ ಸೂಕ್ತ ವಿಲೇವಾರಿ ಮಾಡುವಂತಹ ಅನೇಕ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುವ ಮೂಲಕ ಡೆಂಗ್ಯೂ ಜ್ವರ ಬರದಂತೆ ತಡೆಯಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ನಾಗೇಶ್ವರಿ ಮುಗಳಿವಾಡಿ, ಜಗನಾಥ ಗುತ್ತೇದಾರ, ಗುರುರಾಜ ಕೈನೂರ್, ಸಂಗಮ್ಮ ಅತನೂರ, ಸಿದ್ರಾಮ, ಐಯೇಷಾ ಹಾಗೂ ಬಡಾವಣೆಯ ನಾಗರಿಕರು, ಮಹಿಳೆಯರು ಸೇರಿದಂತೆ ಅನೇಕರು ಇದ್ದರು.