Site icon ಸುದ್ದಿ ಸಂಗ್ರಹ

ಬಾಲ ದೌರ್ಜನ್ಯ ಶಿಕ್ಷಾರ್ಹ ಅಪರಾಧ: ಎಚ್.ಬಿ ಪಾಟೀಲ್

ಕಲಬುರಗಿ: ಬಾಲ ದೌರ್ಜನ್ಯ ಶಿಕ್ಷಾರ್ಹ ಅಪರಾಧ, ಇದರ ನಿರ್ಮೂಲನೆಗೆ ಸರ್ಕಾರಗಳು ಅನೇಕ ಕಾಯ್ದೆ-ಕಾನೂನುಗಳನ್ನು ರಚಿಸಿ ಜಾರಿಗೊಳಿಸಿದೆ. ಅವುಗಳಿಂದಲೇ ದೌರ್ಜನ್ಯ ಸಂಪೂರ್ಣವಾಗಿ ನಾಶವಾಗಲು ಸಾಧ್ಯವಿಲ್ಲ. ಜೊತೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಪ್ರಾಯಪಟ್ಟರು.

ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ಬಾಲದೌರ್ಜನ್ಯ ವಿರೋಧಿ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಬಾಲಕ- ಬಾಲಕಿಯರನ್ನು ಅವರ ಬಾಲ್ಯದ ಕನಸುಗಳಿಂದ ದೂರವಿರಿಸಲು ಯಾರಿಗೂ ಹಕ್ಕಿಲ್ಲ. ಅವರಿಗೆ ದೊರೆಯಬಹುದಾದ ಎಲ್ಲಾ ಹಕ್ಕುಗಳು, ಸೌಕರ್ಯಗಳು ಒದಗಿಸಿಕೊಡುವುದು ಪಾಲಕ-ಪೋಷಕರ ಆದ್ಯ ಕರ್ತವ್ಯವಾಗಿದೆ. ಸಾಕ್ಷರತೆಯ ಪ್ರಮಾಣ ಹೆಚ್ಚಾಗುವದರಿಂದ ಬಾಲಕಾರ್ಮಿಕ ಪದ್ಧತಿ ಕಡಿಮೆಯಾಗುತ್ತದೆ. ಬಾಲ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಾಹಿತಿ, ಪರಿಹಾರಕ್ಕಾಗಿ ಸಹಾಯವಾಣಿ 1098ಕ್ಕೆ ಸಂಪರ್ಕಿಸಬಹುದಾಗಿದೆ. ಮಕ್ಕಳ ಮೇಲಾಗುವ ದೌರ್ಜನ್ಯ ತಡೆಗಟ್ಟಲು ಪೋಕ್ಸೋ ಕಾಯ್ದೆ ಪರಿಣಾಮಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ದತ್ತು ಹಡಪದ, ಸಮಾಜ ಸೇವಕರಾದ ಶಿವಯೋಗೆಪ್ಪ್ಪಾ ಎಸ್.ಬಿರಾದಾರ, ಸಕ್ಸಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಶಿಕ್ಷಕ ಮಹಾದೇವಪ್ಪ ಎಚ್.ಬಿರಾದಾರ ಮತ್ತು ವಿದ್ಯಾರ್ಥಿಗಳು ಇದ್ದರು.

Exit mobile version