ಕಲಬುರಗಿ: ಮಳೆಗಾಲದಲ್ಲಿ ಸರ್ವರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು.
ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ಮಳೆಗಾಲದಲ್ಲಿ ಆರೋಗ್ಯದ ಮುಂಜಾಗೃತಾ ಕ್ರಮಗಳು ವಿಶೇಷ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದ ಅವರು, ಮಳೆಗಾಲ ಪ್ರಾರಂಭವಾಗಿದೆ ವಾತಾವರಣದ ತಂಪಾಗಿದೆ. ಡೆಂಗ್ಯೂ, ಮಲೇರಿಯಾ, ಶೀತ, ನೆಗಡಿ, ಜ್ವರ, ಅಜೀರ್ಣ ಸಮಸ್ಯೆ, ಕಾಲರಾದಂತಹ ಮುಂತಾದ ಸಾಮಾನ್ಯ ಕಾಯಿಲೆಗಳು ಕಂಡುಬರುತ್ತವೆ. ಇಂತಹ ಸಮಯದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಆದ್ದರಿಂದ ಎಲ್ಲರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಮನೆ ಸುತ್ತ ನೀರು ಸಂಗ್ರಹವಾಗದಂತೆ ನೋಡಿಕೊಂಡು ಸ್ವಚ್ಛತೆ ಕಾಪಾಡುವುದು, ಶುದ್ಧವಾದ ನೀರಿನ ಸೇವನೆ, ಸಮತೋಲಿತ ಆಹಾರ ಸೇವಿಸುವುದು, ಮಳೆಯಲ್ಲಿ ನೆನೆಯದಂತೆ ಲಕ್ಷ್ಮ ವಹಿಸುವುದು, ಆಗಾಗ್ಗೆ ಕೈ-ಕಾಲು ಚೆನ್ನಾಗಿ ತೊಳೆದುಕೊಳ್ಳುವುದು, ವಾಸಸ್ಥಳದ ಸಮೀಪ ನೀರು ನಿಲ್ಲದಂತೆ ನೋಡಿಕೊಂಡು, ಪರಿಸರ ಸ್ವಚ್ಛವಾಗಿರುವಂತೆ ಕಾಪಾಡುವುದು, ಬೀದಿ ಬದಿಯ ತೆರೆದಿಟ್ಟ ಆಹಾರ ಪದಾರ್ಥಗಳು ಸೇವಿಸದಿರುವುದು, ಶುದ್ಧವಾದ ನೀರನ್ನು ಹೆಚ್ಚಾಗಿ ಸೇವಿಸುವುದು, ಸಮತೋಲಿತ ಆಹಾರವನ್ನು ಸೇವಿಸಬೇಕೆಂದು ಅನೇಕ ಸಲಹೆ-ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಜಗನಾಥ ಗುತ್ತೇದಾರ, ಗುರುರಾಜ ಕೈನೂರ್, ಗಂಗಾಜ್ಯೋತಿ ಗಂಜಿ, ಸಂಗಮ್ಮ ಅತನೂರ, ರೇಷ್ಮಾ ನಕ್ಕುಂದಿ, ಚಂದಮ್ಮ ಮರಾಠಾ, ಶ್ರೀದೇವಿ ಸಾಗರ, ಚಂದ್ರಕಲಾ ಮಠಪತಿ, ಲಕ್ಷ್ಮಿ ಮೈಲಾರಿ, ನಾಗಮ್ಮ ಚಿಂಚೋಳಿ ಸೇರಿದಂತೆ ಅನೇಕರು ಇದ್ದರು.