ಕಲಬುರಗಿ: ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಪ್ರಮುಖವಾಗಿದೆ. ಯುವ ಸಮೂಹದ ಚೇತನಾ ಶಕ್ತಿಯಾದ ವಿವೇಕಾನಂದರ ಆದರ್ಶ, ಸಂದೇಶವನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯ ಎಂದು ಆಕಾಶವಾಣಿ ಕಾರ್ಯಕ್ರಮದ ನಿವೃತ್ತ ಮುಖ್ಯಸ್ಥ ಡಾ.ಸದಾನಂದ ಪೆರ್ಲ ಹೇಳಿದರು.
ನಗರದ ಗಂಗಾ ನಗರದ ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜಸೇವಾ ಬಳಗದ ವತಿಯಿಂದ ಜರುಗಿದ ‘ಸ್ವಾಮಿ ವಿವೇಕಾನಂದರ 123ನೇ ಸ್ಮರಣೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿವೇಕಾನಂದರು ವಿಶ್ವಕ್ಕೆ ಹೊಸ ಬೆಳಕು ನೀಡಿದವರು. ಅವರ ಒಂದೊಂದು ಮಾತು ಯುವಕರಿಗೆ ಸಂಜೀವಿನಿಯಿದ್ದಂತೆ. ಇಂದಿನ ಯುವಶಕ್ತಿಗೆ ಮೊಬೈಲ್’ಗಳಿಂದ ಹೊರಬರಬೇಕು. ಸಂಸ್ಕಾರ, ಗುರು-ಹಿರಿಯರಿಗೆ, ದೇಶಕ್ಕೆ ಗೌರವ ನೀಡಬೇಕು. ದೇಶಭಕ್ತಿ, ಮಾನವೀಯ ಮೌಲ್ಯಗಳು ಮೈಗೂಡಿಸಿಕೊಳ್ಳಬೇಕು. ನಿಶ್ಚಿತ ಗುರಿಯನ್ನಿಟ್ಟುಕೊಂಡು ದೃಢ ಸಂಕಲ್ಪದೊಂದಿಗೆ ನಿರಂತರವಾಗಿ ಪ್ರಯತ್ನ ಮಾಡಿ, ಜೀವನದಲ್ಲಿ ಉನ್ನತ ಸಾಧನೆ ಮಾಡುವ ಮೂಲಕ ದೇಶದ ಅಮೂಲ್ಯ ಆಸ್ತಿಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ನೀಡಿದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ್, ಕಸಾಪ ಉತ್ತರ ವಲಯದ ಗೌರವ ಅದ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ ಎಸ್ ಗುಡಬಾ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಾವೇರಿ ವಿ ಹೂನಳ್ಳಿ, ಶಿಕ್ಷಕಿಯರಾದ ರಾಜೇಶ್ವರಿ ಎಸ್ ಡಾಂಗೆ, ರೂಪಾ ಎಸ್ ಚೇಂಗಟಾ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕಿಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.