ಕಲಬುರಗಿ: ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಥಮ ಬಾರಿಗೆ ಧ್ವನಿ ಎತ್ತುವ ಮೂಲಕ ಮಂಗಲಪಾಂಡೆ ಸ್ವಾತಂತ್ರ್ಯ ಚಳುವಳಿಗೆ ನಾಂದಿ ಹಾಡಿದ ಅಪ್ರತಿಮ ದೇಶಭಕ್ತ ಎಂದು ಚಿಂತಕ ನರಸಪ್ಪ ಬಿರಾದಾರ ದೇಗಾಂವ ಅಭಿಪ್ರಾಯಪಟ್ಟರು.
ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಬೆಳಿಗ್ಗೆ ಜರುಗಿದ ‘ಮಂಗಲಪಾಂಡೆಯವರ ಜನ್ಮದಿನಾಚರಣೆ’ಯಲ್ಲಿ ಮಾತನಾಡಿದ ಅವರು, ವ್ಯಾಪರಕ್ಕಾಗಿ ಭಾರತಕ್ಕೆ ಆಗಮಿಸಿದ ಬ್ರೀಟಿಷರು ಒಡೆದಾಳುವ ನೀತಿಯ ಮೂಲಕ ಸುಮಾರು 250 ವರ್ಷಗಳ ಕಾಲ ಆಡಳಿತ ಮಾಡಿ ದೇಶವನ್ನು ದಾಸ್ಯಕ್ಕೀಡು ಮಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಹೋರಾಟ ಮಾಡಿದರು ಎಂದರು.
ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಮಾತನಾಡಿ, ಮಂಗಲಪಾಂಡೆ ಇತಿಹಾಸದಲ್ಲಿ ಅಜರಾಮರವಾಗಿದ್ದಾರೆ. ಅವರಲ್ಲಿರುವ ಅಪ್ಪಟ ದೇಶಭಕ್ತಿ ಇಂದಿನ ಯುವಕರಿಗೆ ಮಾದರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಸ್ಲಾಂ ಶೇಖ್, ಪ್ರಮುಖರಾದ ಶಿವಯೋಗೆಪ್ಪಾ ಎಸ್.ಬಿರಾದಾರ, ಪೂಜಾ ಹೂಗಾರ, ಕಾವೇರಿ ಹೌದೆ, ಭಾಗ್ಯಶ್ರೀ ಕಾರಬಾರಿ ಮತ್ತು ವಿದ್ಯಾರ್ಥಿಗಳು ಇದ್ದರು.