ಕಲಬುರಗಿ: ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಅಸಂಖ್ಯಾತ ಭಾರತಿಯರು ನಿರಂತರ ಹೋರಾಟ ಮಾಡಬೇಕಾಯಿತು. ಸ್ವಾತಂತ್ರ್ಯಕ್ಕಾಗಿ ಜರುಗಿದ ಸಾಕಷ್ಟು ಹೋರಾಟಗಳಲ್ಲಿ ‘ಕ್ವಿಟ್ ಇಂಡಿಯಾ ಚಳುವಳಿ, ಪ್ರಮುಖವಾಗಿದೆ. ‘ಮಾಡು ಇಲ್ಲವೆ ಮಡಿ, ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಜರುಗಿದ ಚಳುವಳಿ ಜನಸಾಮಾನ್ಯರ ಚಳುವಳಿಯಾಗಿದ್ದರಿಂದ ಮುಂದೆ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ತನ್ನದೆಯಾದ ಪ್ರಮುಖ ಪಾತ್ರ ವಹಿಸಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.
ಅಫಜಲಪುರ ತಾಲೂಕಿನ ಗೊಬ್ಬೂರ(ಕೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಕ್ವಿಟ್ ಇಂಡಿಯಾ ಚಳುವಳಿ ದಿನಾಚರಣೆ’ಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ದೇಶದ ಜನರೆ ಹೆಚ್ಚಾಗಿ ಸ್ವ-ಇಚ್ಛೆಯಿಂದ ಚಳುವಳಿಯಲ್ಲಿ ಭಾಗವಹಿಸಿದ್ದರಿಂದ ಎಲ್ಲೆಡೆ ವ್ಯಾಪಕವಾಗಿ ಹರಡಿ ಸ್ವಾತಂತ್ರ್ಯ ಪಡೆಯುವಲ್ಲಿ ಸಹಕಾರಿಯಾಯಿತು. ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಆಸ್ತಿ-ಪಾಸ್ತಿ, ಜೀವವನ್ನು ನೀಡಿ ಸ್ವಾತಂತ್ರ್ಯ ನೀಡಿದ್ದಾರೆ. ವಿಶ್ವಕ್ಕೆ ಗುರುವಾಗಬಲ್ಲ ಶಕ್ತಿ ಭಾರತಕ್ಕಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಭಾರತೀಯ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.
ಶಾಲೆಯ ಮುಖ್ಯ ಶಿಕ್ಷಕ ಶಿವಶರಣಪ್ಪ ಜಮಾದಾರ ಮಾತನಾಡಿ, ನಮ್ಮ ದೇಶದ ಸ್ವಾತಂತ್ರಕ್ಕಾಗಿ ಲಕ್ಷಾಂತರ ಹೋರಾಟಗಾರರು ತಮ್ಮ ಜೀವವನ್ನು ನೀಡಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟಿದ್ದಾರೆ. ಅವರಲ್ಲಿರುವ ದೇಶಪ್ರೇಮ, ರಾಷ್ಟ್ರಭಕ್ತಿ, ಐಕ್ಯತೆ, ಭ್ರಾತೃತ್ವ ಭಾವನೆಯಂತಹ ಗುಣಗಳನ್ನು ಪ್ರತಿಯೊಬ್ಬ ಭಾರತೀಯ ಮೈಗೂಡಿಸಿಕೊಂಡು ಅವರು ದೊರಕಿಸಿಕೊಟ್ಟ ಸ್ವಾತಂತ್ರ್ಯ ಮೌಲ್ಯಗಳನ್ನು ಕಾಪಾಡಿಕೊಂಡು ದೇಶವನ್ನು ರಕ್ಷಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದರು..
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಮಾಜಿ ಸೈನಿಕ ಶಿವಶರಣಪ್ಪ ಎಸ್.ತಾವರಖೇಡ್, ಶಾಲೆಯ ಶಿಕ್ಷಕರಾದ ವಾಸಂತಿ, ಅಶೋಕ, ಈರಮ್ಮ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.