ಕಾಲೇಜಿನ ಅತಿಥಿ ಉಪನ್ಯಾಸಕರ ಶೈಕ್ಷಣಿಕ ಗೊಂದಲ ಪರಿಹರಿಸಲು ಪ್ರತಿಭಟನೆ

ಪಟ್ಟಣ

ಚಿತ್ತಾಪುರ: ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಬಗೆಹರಿಸಬೇಕು ಮತ್ತು ಅತಿಥಿ ಉಪನ್ಯಾಸಕರ ನೇಮಕ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಎಐಡಿಎಸ್ಓ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ತಹಸೀಲ್ ಕಚೇರಿಯವರೆಗೆ ಎಐಡಿಎಸ್ಓ ತಾಲೂಕು ಪದಾಧಿಕಾರಿಗಳ ನೇತೃತ್ವದದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಸಮಿತಿ ಸದಸ್ಯ ದೇವರಾಜು ಎಸ್ ರಾಜೋಳ್ ಮಾತನಾಡಿ, ರಾಜ್ಯದಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳುಗಳೆ ಕಳೆದರು ಇಲ್ಲಿಯವರೆಗೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೆ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದೆ ಆದರೆ ಪಾಠಗಳು ಇನ್ನೂ ಆರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುಜಿಸಿಯ ಹೊಸ ನಿರ್ದೇಶನಗಳು ಮತ್ತು ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರ ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತಕ್ರಮ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಸಮಿತಿ ಸದಸ್ಯ ಸಿದ್ದಾರ್ಥ ತಿಪನೂರ, ತಾಲುಕು ಸಂಚಾಲಕಿ ಪ್ರೀತಿ ದೋಡ್ಡಮನಿ, ವಿದ್ಯಾರ್ಥಿಗಳಾದ ದೇವರಾಜ , ತಿಪಣ್ಣ, ಭಾಗ್ಯಶ್ರೀ, ಪಲ್ಲವಿ, ಪ್ರಶಾಂತ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *