ಚಿತ್ತಾಪುರ: ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ಗುಂಡಗುರ್ತಿ ಗ್ರಾಮದ ಮನೆಗಳಲ್ಲಿ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ದವಸ ಧಾನ್ಯ ಸೇರಿದಂತೆ ಇನ್ನಿತರ ಸಾಮಾಗ್ರಿಗಳು ಸಂಪೂರ್ಣವಾಗಿ ಹಾಳಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಗ್ರಾಮದ ಪ್ರಮುಖ ರಸ್ತೆ ಸೇರಿದಂತೆ ಮನೆಗಳಲ್ಲಿ
ನೀರು ನುಗ್ಗಿ ಅನಾಹುತ ಸಂಭವಿಸಿದ ಪ್ರತಿಯೊಬ್ಬರ ಮನೆಗೆ ಭೇಟಿ ನೀಡಿ, ಏನೆಲ್ಲ ಸಮಸ್ಯೆಗಳಾಗಿವೆ ಎನ್ನುವುದರ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು.
ಹಳ್ಳದ ನಾಲಾ ಸ್ವಚ್ಛತೆ ಕೈಗೊಳ್ಳಲು ಸ್ಥಳದಲ್ಲೇ ಇದ್ದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಸಹಾಯಕ ಆಯುಕ್ತ ಸಾಹಿತ್ಯ ಆಲದಕಟ್ಟೆ, ಸೇಡಂ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್, ತಹಸೀಲ್ದಾರ್ ನಾಗಯ್ಯ ಹಿರೇಮಠ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುಹಮ್ಮದ್ ಅಕ್ರಂ ಪಾಷಾ ಸೇರಿದಂತೆ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಇದ್ದರು.