ಅಮರಾವತಿ: ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 10 ಜನ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ.
ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು, ಭಕ್ತರ ಸಾವು ಹೃದಯವಿದ್ರಾವಕ ಎಂದು ವಿಷಾದಿಸಿದ್ದಾರೆ.
ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರಿಗೆ ತ್ವರಿತ ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆನೆ ಎಂದು ನಾಯ್ಡು ತಿಳಿಸಿದ್ದಾರೆ.
ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸಿಎಂ ಹೇಳಿದ್ದಾರೆ.