Site icon ಸುದ್ದಿ ಸಂಗ್ರಹ

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್: 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕಾರವಾರ: ಸಾರಿಗೆ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದು, ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಗೇರುಸೊಪ್ಪಾದ ಸೂಳೆಮುರ್ಕಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ.

ಬೆಳಗಿನ ಜಾವ ಸುಮಾರು 2 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಹಾನಗಲ್‌ನಿಂದ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಸಿದ್ದಾಪುರ ಮಾರ್ಗವಾಗಿ ಹೊನ್ನಾವರದ ಕಡೆಗೆ ಬರುತ್ತಿತ್ತು. ಘಟ್ಟ ಪ್ರದೇಶದ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯ ಎಡಬದಿಯ ತಗ್ಗು ಪ್ರದೇಶಕ್ಕೆ ಬಿದ್ದಿದೆ.

ಅಪಘಾತದಲ್ಲಿ ಬಸ್ ಚಾಲಕ, ನಿರ್ವಾಹಕ ಸೇರಿದಂತೆ ಬಸ್ಸಿನಲ್ಲಿದ್ದ ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯ ಚಾಲನೆ ಆರೋಪದಡಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Exit mobile version