ಸುದ್ದಿ ಸಂಗ್ರಹ ಚಿತ್ತಾಪುರ
ಒಳಮೀಸಲಾತಿ ಜಾರಿ ವಿರೋಧಿಸಿ ಮತ್ತು ಹಳೆ ಮೀಸಲಾತಿ ನಿಯಮದಂತೆ ನೇಮಕಾತಿ ನಡೆಸಲು ಒತ್ತಾಯಿಸಿ ಮಾರ್ಚ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಡಿ ಚವ್ಹಾಣ್ ಹೇಳಿದರು.
ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಗದ ವರದಿ ಅಸಂಬದ್ಧವಾಗಿದೆ, ಈ ವರದಿಯಿಂದ ಭೋವಿ, ಬಂಜಾರ, ಕೊರಮ, ಕೊರಚ, ಛಲವಾದಿ, ಚರ್ಮಕಾರ ಸೇರಿದಂತೆ ಹಲವು ಸೂಕ್ಷ್ಮ ಜಾತಿಗಳಿಗೆ ಅನ್ಯಾಯವಾಗುತ್ತಿದೆ, ಈ ಹಿನ್ನೆಲೆಯಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಸಮೀತಿಯ ತಾಲೂಕ ಅಧ್ಯಕ್ಷ ಮಹೇಶ ಕಾಶಿ ಮಾತನಾಡಿ, ಸರ್ಕಾರವು ಮೀಸಲಾತಿಯಲ್ಲಿ ಅನ್ಯಾಯ ಮಾಡುತ್ತಿರುವುದನ್ನು ವಿರೋಧಿಸಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ನಮ್ಮ ಸ್ವಾಭಿಮಾನ ಮತ್ತು ಹಕ್ಕಿಗಾಗಿ ರಾಜ್ಯಾದ್ಯಂತ ಸಾಕಷ್ಟು ಜನರು ಭಾಗವಹಿಸಲಿದ್ದು, ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಸಮಾಜ ಬಾಂಧವರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿವಿಧ ಸಮಾಜದ ಮುಖಂಡರಾದ ಗೋಪಾಲ ಡಿ ರಾಠೋಡ್, ವಿಠ್ಠಲ್ ಕಟ್ಟಿಮನಿ, ಮರಿಯಪ್ಪ ಭಜಂತ್ರಿ, ಪ್ರವೀಣ್ ಪವಾರ್, ದೇವಿದಾಸ ಚವ್ಹಾಣ, ಶ್ರೀಕಾಂತ್ ರಾಠೋಡ್, ವಿಜಯ ಪವಾರ, ಮಹದೇವ ಭಜಂತ್ರಿ, ದೀಪಕ್ ಜಾಧವ, ಜಗದೀಶ್ ಪವಾರ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.