ಸುದ್ದಿ ಸಂಗ್ರಹ ಚಿತ್ತಾಪುರ
ಕನ್ನಡ ಭಾಷೆ, ಸಾಹಿತ್ಯ, ಕಲೆ, ಜನಪದ, ಸಂಸ್ಕೃತಿಗಳ ಸಂವರ್ಧನೆ ಮತ್ತು ಸಂರಕ್ಷಣೆಯ ಹಿತ ದೃಷ್ಟಿಯಿಂದ 1915ರ ಮೇ 5ರಂದು ಕನ್ನಡ ಸಾಹಿತ್ಯ ಪರಿಷತ್ ಜನ್ಮ ತಾಳಿದೆ ಎಂದು ಸರ್ಕಾರಿ ಬಾಲಕರ ಪ್ರೌಢ ಶಾಲೆಯ ಮುಖ್ಯಗುರು ಕಾಶಿರಾಯ ಕಲಾಲ ಹೇಳಿದರು.
ಪಟ್ಟಣದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಸಂಚಾಲಿತ ವಿದ್ಯಾನಿಕೇತನ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ಕಸಾಪದ 112ನೇ ಸಂಸ್ಥಾಪನಾ ದಿನಾಚರಣೆ ಮತ್ತು ಪರಿಷತ್ತಿನ ಹಿರಿಯ ಸದಸ್ಯರಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ ಸರಳ ಭಾಷೆ, ಕನ್ನಡ ಭಾಷೆ ಪ್ರತಿಯೊಬ್ಬರ ಮನೆ ಹೆಬ್ಬಾಗಿಲು ಇದ್ದಂತೆ. ಪರಿಷತ್ತಿನ ಮೂಲಕ ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ಒಗ್ಗೂಡಿಸುವ, ಅದರ ಅಸ್ಮಿತೆಯನ್ನು ರಕ್ಷಿಸಿಕೊಳ್ಳುವ ದಿಸೆಯಲ್ಲಿ ಹಾಗೂ ಕನ್ನಡ ಕಟ್ಟುವ ಕಾರ್ಯಕ್ಕೆ ನೆರವಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಹೆಮ್ಮರವಾಗಿ ಬೆಳೆದು ರಾಜ್ಯದಲ್ಲಿ ಆರು ಕೋಟಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆವಾಗಿದೆ ಎಂದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆ ವಿಶ್ವದಲ್ಲೆ ಶ್ರೇಷ್ಠವಾದ ಭಾಷೆಯಾಗಿದೆ. ಎಲ್ಲರಲ್ಲೂ ಅರಿವು ಮೂಡಿಸುವ ಕೆಲಸ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ. ಮಾತೃಭಾಷೆ ಕನ್ನಡಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು. ಉಳಿದ ಇಂಗ್ಲಿಷ, ಹಿಂದಿ ಭಾಷೆ ಕೂಡ ಜತೆಗೆ ಇರಲಿ. ಕನ್ನಡ ಕಟ್ಟುವ, ಬೆಳೆಸುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಅಧ್ಯಕ್ಷ ವೀರಭದ್ರಪ್ಪ ಗುರುಮಿಠಕಲ್, ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಪುರಸಭೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಜಗದೀಶ ಚವ್ಹಾಣ, ತಾಲೂಕು ದೈಹಿಕ ಶಿಕ್ಷಣ ಪರುವೀಕ್ಷಕ ಶಿವಶರಣಪ್ಪ ಮಠಾಳೆ ಮಾತನಾಡಿದರು.
ಕಸಾಪದ ಹಿರಿಯ ಹಾಗೂ ಅಜೀವ ಸದಸ್ಯರಾದ ರಾಜಶೇಖರ ಗೋಣಗಿ ಮತ್ತು ಸಂಜಯ ಕೋಟ್ರಕಿ ಅವರಿಗೆ ಗೌರವ ಸನ್ಮಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕಸಾಪ ತಾಲೂಕು ಗೌರವಾಧ್ಯಕ್ಷ ವೀರೇಂದ್ರಕುಮಾರ ಕೊಲ್ಲೂರ, ಮುಖ್ಯಗುರು ರಮೇಶ ಯಾದವಾಡ, ಪ್ರಮುಖರಾದ ಬಸವರಾಜ ಬೊಮ್ಮನಳ್ಳಿ, ಮಹೇಶ, ಶ್ರೀದೇವಿ ಸೇರಿದಂತೆ ಅನೇಕರು ಇದ್ದರು.
ಗೌರವ ಕಾರ್ಯದರ್ಶಿ ನರಸಪ್ಪ ಚಿನ್ನಕಟ್ಟಿ ಪ್ರಾರ್ಥಿಸಿದರು, ಲಲಿತಮ್ಮ ರೇಷ್ಮಿ ಸ್ವಾಗತಿಸಿದರು, ಬಸಪ್ಪ ಯಂಬತ್ನಾಳ ನಿರೂಪಿಸಿದರು ಮತ್ತು ಅನಿಲಕುಮಾರ ಸನ್ಮುಖ ವಂದಿಸಿದರು.