ಸುದ್ದಿ ಸಂಗ್ರಹ ಮೈಸೂರು
ಮುಂಬರುವ ಯಾವುದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಎಂಎಲ್ಸಿ ಎಚ್ ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಆದರೆ ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು 50 ಕೋಟಿ ರೂ. ಹಣ ಬೇಕು. ರಿಯಲ್ ಎಸ್ಟೇಟ್ ನಡೆಸುವವರು ನಿವೇಶನಗಳನ್ನಾದರೂ ಮಾರಾಟ ಮಾಡಿ ಚುನಾವಣೆ ಎದುರಿಸುತ್ತಾರೆ. ನನಗೆ ಒಂದು ಮನೆ ಒಂದು ನಿವೇಶನ ಮಾತ್ರ ಇವೆ. 50 ಕೋಟಿ ರೂ. ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ಈಗ ನನ್ನಲ್ಲಿ ಇಲ್ಲ ಎಂದರು.
ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರ ಶಕ್ತಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ಸಹ ರಾಜಕೀಯದಲ್ಲಿ ಮುಂದುವರಿಯುತ್ತೆನೆ, ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು.