ಸುದ್ದಿ ಸಂಗ್ರಹ ಬೆಂಗಳೂರು
ಹಾಲಿನ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದ್ದಂತೆ ಆಹಾರ ಸುರಕ್ಷತಾ ಇಲಾಖೆ ಎಚ್ಚರ ವಹಿಸಿದೆ. ಅಧಿಕಾರಿಗಳು ವಿವಿಧ ಗಡಿಭಾಗಗಳಲ್ಲಿ ತಪಾಸಣೆ ನಡೆಸಿ ಹಾಲಿನ ಮಾದರಿ ಸಂಗ್ರಹಿಸಿದ್ದಾರೆ.
ಹಾಲಿನ ಗುಣಮಟ್ಟ ಪರಿಶೀಲನೆಗಾಗಿ ಹೊಸೂರು, ಚಾಮರಾಜನಗರ ಮತ್ತು ಮೈಸೂರು ಗಡಿಭಾಗಗಳಲ್ಲಿ ತಪಾಸಣೆ ನಡೆಸಲಾಗಿದೆ. ಖಾಸಗಿ ಒಡೆತನದ ಹಾಲಿನ ಟ್ಯಾಂಕರ್ಗಳನ್ನು ತಡೆದು ಮಾದರಿ ಸಂಗ್ರಹಿಸಲಾಗಿದೆ.
ದೊಡ್ಲಾ ಸೇರಿದಂತೆ ವಿವಿಧ ಕಂಪನಿಗಳ ಹಾಲಿನ ಟ್ಯಾಂಕರ್ಗಳಿಂದ ಸ್ಯಾಂಪಲ್ ಪಡೆಯಲಾಗಿದೆ. ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಹಾಲಿನಲ್ಲಿ ಕಲಬೆರಕೆ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಈ ಕ್ರಮ ಕೈಗೊಂಡಿದೆ. ಪರೀಕ್ಷಾ ವರದಿ ಬಂದ ಬಳಿಕ ಹಾಲಿನ ಗುಣಮಟ್ಟದ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ರಾಜ್ಯ ಸರ್ಕಾರ ಹಾಲಿನ ಗುಣಮಟ್ಟದ ಮೇಲ್ವಿಚಾರಣೆಗೆ ಒತ್ತು ನೀಡಿದ್ದು, ಕಲಬೆರಕೆ ತಡೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಹೀಗಾಗಿ ಗ್ರಾಹಕರ ಆರೋಗ್ಯ ರಕ್ಷಣೆಗೆ ಇಲಾಖೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸುತ್ತಿದೆ.