ಸುದ್ದಿ ಸಂಗ್ರಹ ಕಾರವಾರ
ಯಲ್ಲಾಪುರ ತಾಲೂಕಿನ ಚವತ್ತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಹಂದಿ ಜ್ವರಕ್ಕೆ ಬಲಿಯಾಗಿದ್ದಾರೆ.
ಮೃತರನ್ನು ರಾಜು ಮಂಜಗೌಡ (41) ಎಂದು ಗುರುತಿಸಲಾಗಿದೆ. ಜೂ.8 ರಂದು ಅವರು ಅಸ್ವಸ್ಥರಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿರಸಿ ಮಾರಿಕಾಂಬಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೂ ಅವರಿಗೆ ಕಾಯಿಲೆ ಉಲ್ಬಣಗೊಂಡಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಈ ಘಟನೆ ಯಲ್ಲಾಪುರ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಜ್ವರ, ಕೆಮ್ಮು, ನೆಗಡಿ, ಮೈಕೈ ನೋವು, ಗಂಟಲು ನೋವು, ಉಸಿರಾಟದ ತೊಂದರೆ ಅಥವಾ ಅತಿಯಾದ ಸುಸ್ತು ಕಂಡುಬಂದಲ್ಲಿ ಕೂಡಲೆ ಹತ್ತಿರದ ಸರ್ಕಾರಿ ಅಥವಾ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಹಾಗೂ ಚಿಕಿತ್ಸೆ ಪಡೆಯುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ತೀವ್ರ ಉಸಿರಾಟದ ತೊಂದರೆ, ಎದೆನೋವು, ನಿರ್ಜಲೀಕರಣ ಅಥವಾ ಗೊಂದಲದ ಲಕ್ಷಣಗಳು ಕಂಡುಬಂದರೆ ತುರ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ವೈದ್ಯರು ತಿಳಿಸಿದ್ದಾರೆ.
ವೈರಾಣುವಿನಿಂದ ಹಂದಿಜ್ವರ ಬರುತ್ತದೆ. ಈ ವೈರಸ್ಗೆ ಹೆಚ್1ಎನ್1 ಎಂದು ಕರೆಯುತ್ತಾರೆ. ಸೋಂಕಿತ ವ್ಯಕ್ತಿ ಕೆಮ್ಮಿದಾಗ ಅಥವಾ ಸೀನಿದಾಗ ವೈರಸ್ ಗಾಳಿಯಲ್ಲಿ ಹರಡುತ್ತದೆ. ಅಲ್ಲದೇ ವೈರಸ್ ಇರುವ ಬಾಗಿಲ ಹಿಡಿಕೆ, ಫೋನ್ ಇತ್ಯಾದಿ ಮುಟ್ಟಿ, ನಂತರ ಕಣ್ಣು, ಮೂಗು ಅಥವಾ ಬಾಯಿಯನ್ನು ಮುಟ್ಟಿಕೊಳ್ಳುವುದರಿಂದಲೂ ಸೋಂಕು ಹರಡುತ್ತದೆ. ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದರಿಂದ ಹೆಚ್1ಎನ್1 ಸೋಂಕಿನಿಂದ ದೂರ ಉಳಿಯಬಹುದಾಗಿದೆ.