ಕಲಬುರಗಿ: ಜು.29 ರಂದು ನಾಲವಾರ ಶ್ರೀಗಳ ಗುರುವಂದನಾ ಕಾರ್ಯಕ್ರಮ

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ನಾಲವಾರ
ಗುರುಪೂರ್ಣಿಮೆ ನಿಮಿತ್ತ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಗುರುವಂದನಾ ಕಾರ್ಯಕ್ರಮ ಜುಲೈ 29ರಂದು ಬುಧವಾರ ಕಲಬುರಗಿ ನಗರದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ.

ಕಲಬುರಗಿಯ ಕರುಣೇಶ್ವರ ನಗರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನದ ಶಾಖಾಮಠದಲ್ಲಿ ಬುಧವಾರ ಸಂಜೆ 5 ಗಂಟೆಗೆ ಗುರುಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ ಎಂದರು.

ಗುರುವಂದನೆ ನಿಮಿತ್ತ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ನಂತರ ಪರಮಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಭಕ್ತರಿಂದ ಮಹಾಪಾದಪೂಜೆ ಗುರುಕಾಣಿಕೆ ಸಮರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಯಕ್ರಮಕ್ಕೆ ಸಾವಿರಾರು ಜನ ಸದ್ಭಕ್ತರು ಭಾಗವಹಿಸಲಿದ್ದಾರೆ ಎಂದರು.‌

ಕಳೆದ ಹಲವು ವರ್ಷಗಳಿಂದ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಯುತ್ತಿದ್ದ ನಾಲವಾರ ಶ್ರೀಗಳ ಗುರುಪೂರ್ಣಿಮೆ ಮಹೋತ್ಸವ ಕಾರ್ಯಕ್ರಮವು ಈ ಬಾರಿ ಕಲಬುರಗಿ ಮಹಾನಗರದಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ ಎಂದರು.

ಹಲವು ರಾಜಕೀಯ, ಸಾಮಾಜಿಕ ಕ್ಷೇತ್ರದ ಮುಖಂಡರು, ಕವಿ-ಕಲಾವಿದರು ಭಾಗವಹಿಸಿ ಭಕ್ತಿ ಸಮರ್ಪಣೆ ಮಾಡಿ, ಗುರುವಿಗೆ ನಮಿಸುವ ಈ ಕಾರ್ಯಕ್ರಮದಲ್ಲಿ ನಾಲವಾರ ಶ್ರೀಮಠದ ಸರ್ವ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುವಿನ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *