ಸುದ್ದಿ ಸಂಗ್ರಹ ಯಾದಗಿರಿ
ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ರೈತರ ನಿದ್ದೆಗೆಡಿಸಿದ್ದ ಅಂತಾರಾಜ್ಯ ದನಗಳ್ಳರ ಖತರ್ನಾಕ್ ಗ್ಯಾಂಗ್ನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ . ದನಗಳನ್ನು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಬರೋಬ್ಬರಿ 40 ಕಿ.ಮೀ ಬೆನ್ನಟ್ಟಿ ಖೆಡ್ಡಾ ತೋಡುವಲ್ಲಿ ಯಾದಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಡೆದಿದ್ದೇನು ?
ಕಳೆದ ಎರಡು ವರ್ಷಗಳಿಂದ ವಡಗೇರ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಈ ಗ್ಯಾಂಗ್ ನಿರಂತರವಾಗಿ ಕೈಚಳಕ ತೋರುತ್ತಿತ್ತು. ಮನೆಗಳ ಮುಂದೆ ಹಾಗೂ ಕೊಟ್ಟಿಗೆಯಲ್ಲಿ ಕಟ್ಟಲಾಗಿದ್ದ ರಾಸುಗಳಿಗೆ ಅರವಳಿಕೆ (ನಿದ್ದೆ ಬರುವ) ಇಂಜೆಕ್ಷನ್ ನೀಡಿ, ಅವು ಪ್ರಜ್ಞೆ ತಪ್ಪುತ್ತಿದ್ದಂತೆ ತಮ್ಮ ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನದಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದರು. ಕದ್ದ ದನಗಳನ್ನು ನೇರವಾಗಿ ಕಸಾಯಿಖಾನೆಗಳಿಗೆ ಸಾಗಿಸಿ ಮಾರಾಟ ಮಾಡುವುದು ಈ ಗ್ಯಾಂಗ್ನ ದಂಧೆಯಾಗಿತ್ತು. ಈ ಕುರಿತು ಯಾದಗಿರಿ ಜಿಲ್ಲೆಯ ವಡಗೇರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಹತ್ತಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.
ಕಲಬುರಗಿಯಲ್ಲಿ ವಾಸವಾಗಿದ್ದ ಗ್ಯಾಂಗ್
ಕಲಬುರಗಿಯಲ್ಲಿ ತಾತ್ಕಾಲಿಕವಾಗಿ ನೆಲೆಸಿದ್ದ ಈ ಗ್ಯಾಂಗ್, ಎಂದಿನಂತೆ ದನ ಕದ್ದು ಕಪ್ಪು ಸ್ಕಾರ್ಪಿಯೋದಲ್ಲಿ ವೇಗವಾಗಿ ಎಸ್ಕೇಪ್ ಆಗಲು ಯತ್ನಿಸಿದೆ. ಖಚಿತ ಮಾಹಿತಿ ಪಡೆದ ವಡಗೇರ ಹಾಗೂ ಯಾದಗಿರಿ ಗ್ರಾಮಾಂತರ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆಗಿಳಿದು ವಾಹನ ಚೇಸ್ ಮಾಡಿದ್ದಾರೆ. ಪೊಲೀಸರು ಬೆನ್ನಟ್ಟುತ್ತಿದ್ದರೂ ಕಳ್ಳರು ವಾಹನ ನಿಲ್ಲಿಸದೆ ಅತಿ ವೇಗವಾಗಿ ಹೆದ್ದಾರಿಯಲ್ಲಿ ಸಾಗಿದ್ದಾರೆ. ಪರಿಸ್ಥಿತಿಯ ಗಂಭೀರತೆ ಅರಿತ ಪೊಲೀಸರು, ಯಾದಗಿರಿ ತಾಲೂಕಿನ ಯರಗೋಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಗೆ ಅಡ್ಡಲಾಗಿ ಜೆಸಿಬಿ ಮತ್ತು ಟ್ರಾಕ್ಟರ್ ನಿಲ್ಲಿಸಿದ್ದಾರೆ.
ವೇಗವಾಗಿ ಬಂದ ಕಳ್ಳರ ಸ್ಕಾರ್ಪಿಯೋ ವಾಹನ ನಿಯಂತ್ರಣ ತಪ್ಪಿ ನೇರವಾಗಿ ಜೆಸಿಬಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಳ್ಳರ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಒಳಗಿದ್ದ ಆರೋಪಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಸ್ಥಳವನ್ನು ಸುತ್ತುವರಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರು ಜನರ ಬಂಧನ
ಬಂಧಿತರನ್ನು ಹರಿಯಾಣ ಮೂಲದ ಸಮೂನ್, ಅನಿಬ್, ಇರ್ಷಾದ್, ನಪೀಸ್, ಅಜೀಮ್ ಮತ್ತು ರಾಜಸ್ಥಾನ ಮೂಲದ ನಿತಿನ್ ಎಂದು ಗುರುತಿಸಲಾಗಿದೆ. ಜೀವದ ಹಂಗು ತೊರೆದು ರಸ್ತೆ ಮಧ್ಯೆ ಜೆಸಿಬಿ ನಿಲ್ಲಿಸಿ, ಅಂತರರಾಜ್ಯ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರ ಸಮಯಪ್ರಜ್ಞೆ ಮತ್ತು ಧೈರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.