17 ಕ್ಕೆ ಶ್ರಾವಣ ಮುಕ್ತಾಯ: ನಾಲವಾರದಲ್ಲಿ ಪಲ್ಲಕ್ಕಿ ಉತ್ಸವ
ನಾಲವಾರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ಶ್ರೀಕ್ಷೇತ್ರ ನಾಲವಾರದ ಸದ್ಗುರು ಶ್ರೀ ಕೋರಿ ಸಿದ್ದೇಶ್ವರ ಮಹಾಸಂಸ್ಥಾನ ಮಠದಲ್ಲಿ ಸೆ. 17, ಗುರುವಾರ ಶ್ರಾವಣ ಮುಕ್ತಾಯ ಸಮಾರಂಭ ಅತ್ಯಂತ ಅದ್ದೂರಿಯಾಗಿ ನೆರವೇರಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಕೆ. ಗಂವ್ಹಾರ ತಿಳಿಸಿದ್ದಾರೆ.
ಶ್ರಾವಣ ಮಾಸದುದ್ದಕ್ಕೂ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಮಾರೋಪದ ನಿಮಿತ್ತ ಗುರುವಾರ ಮಧ್ಯಾಹ್ನ ಪೀಠಾಧಿಪತಿಗಳಾದ ಡಾ. ಸಿದ್ಧತೋಟೇಂದ್ರ ಮಹಾಸ್ವಾಮಿಗಳವರ ಪುರಪ್ರವೇಶ, ಅದ್ದೂರಿ ಶೋಭಾಯಾತ್ರೆ ಹಾಗೂ ಸದ್ಗುರು ಶ್ರೀ ಕೋರಿ ಸಿದ್ದೇಶ್ವರ ಮಹಾಶಿವಯೋಗಿಗಳ ಪಲ್ಲಕ್ಕಿ ಉತ್ಸವ ಜರುಗಲಿದೆ.
ಶಾವಣ ಮಾಸದ ನಂತರ ಬರುವ ಮೊದಲ ಗುರುವಾರ ನಾಲವಾರ ಶ್ರೀಮಠದಲ್ಲಿ ಶ್ರಾವಣ ಮುಕ್ತಾಯ ಸಮಾರಂಭ ನಡೆಸುವುದು ಸಂಪ್ರದಾಯವಾಗಿದ್ದು, ನಾಲವಾರ ಗ್ರಾಮ ಮಾತ್ರವಲ್ಲದೆ ಸುತ್ತಮುತ್ತಲಿನ ಎಲ್ಲ ಗ್ರಾಮಗಳ ಹಾಗೂ ನಾಡಿನ ವಿವಿಧ ಭಾಗಗಳ ಸಹಸಾರು ಭಕ್ತರು ಪಾಲ್ಗೊಳ್ಳುತ್ತಾರೆ.
ಶ್ರಾವಣ ಮಾಸದ ಪ್ರಯುಕ್ತ ಶ್ರೀಮಠದಲ್ಲಿ ಪ್ರತಿದಿನ ಕರ್ತೃ ಕೋರಿ ಸಿದ್ದೇಶ್ವರರ ಗದ್ದುಗೆಗೆ ವಿಶೇಷ ಅಲಂಕಾರ, ಪೂಜೆ, ನಂತರ ಡಾ. ಸಿದ್ಧತೋಟೇಂದ್ರ ಶಿವಾಚಾರ್ಯ 1 ಮಹಾಸ್ವಾಮಿಗಳವರ ಇಷ್ಟಲಿಂಗ ಸಹಿತ ಮಹಾಪೂಜೆ, ಭಕ್ತರಿಗೆ ರುದ್ರಾಕ್ಷಿ ಧಾರಣೆ, ಇಷ್ಟಲಿಂಗ ಧಾರಣೆ, ಜಂಗಮ ವಟುಗಳಿಗೆ ಅಯ್ಯಾಚಾರ ದೀಕ್ಷೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ಗುರುವಾರಕ್ಕೆ ಮುಕ್ತಾಯಗೊಳ್ಳಲಿವೆ. ಪ್ರತಿವರ್ಷದಂತೆ ಈ ವರ್ಷವೂ ನಾಡಿನ ವಿವಿಧ ಭಾಗಗಳ ಸಹಸ್ರಾರು ಭಕ್ತರು ತಂಡೋಪತಂಡವಾಗಿ ಪಾದಯಾತ್ರೆ ಮೂಲಕ ಶ್ರೀಮಠಕ್ಕೆ ಆಗಮಿಸಿ ದರ್ಶನ ಪಡೆದರು. ದಾಸೋಹಕ್ಕಾಗಿ ತಾವು ಬೆಳೆದ ಧಾನ್ಯಗಳನ್ನು ತಲೆಯ ಮೇಲೆ ಹೊತ್ತು ತಂದು ಸಮರ್ಪಿಸಿದ್ದು ವಿಶೇಷವಾಗಿತ್ತು.
ಗುರುವಾರ ನಡೆಯುವ ಪೂಜ್ಯರ ಪುರಪ್ರವೇಶ 1 ಹಾಗೂ ಶೋಭಾಯಾತ್ರೆಯಲ್ಲಿ ಪುರವಂತಿಗೆ, ಗೊಂಬೆ 1 ಕುಣಿತ, ಡೊಳ್ಳು, ಹಲಗೆ, ತಮಟೆ, ಲೇಜಿಮ್ ಕುಣಿತ, ಕೋಲಾಟ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು 1 ಭಾಗವಹಿಸಲಿವೆ. ಮೆರವಣಿಗೆ ನಂತರ ಭಕ್ತರಿಗೆ ವಿಶೇಷ ಪ್ರಸಾದ ವ್ಯವಸ್ಥೆ ಇರಲಿದೆ. ನಾಲವಾರ ಶ್ರೀಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುವಿನ ಕೃಪೆಗೆ ಪಾತ್ರರಾಗಬೇಕೆಂದು 1 ಮಹಾದೇವ ಗಂವ್ಹಾರ ಅವರು ಕೋರಿದ್ದಾರೆ.